ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯರ ಆಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಮುನಿರತ್ನ ವಿರುದ್ಧವೇ ಸಿದ್ದು ಇಂದು ಅಖಾಡಕ್ಕೆ ಇಳಿದಿದ್ದರು. ಕ್ರಿಮಿನಲ್ ಹಿನ್ನೆಲೆಯ ಶಾಸಕ ಬೇಕೋ ಅಥವಾ ಶುದ್ಧ ಹಸ್ತದ ಸುಸಂಸ್ಕೃತ ಹೆಣ್ಣು ಮಗಳು ಬೇಕೋ ನೀವೆ ಆಯ್ಕೆ ಮಾಡಿ ಎಂದು ಪ್ರಚಾರ ಮಾಡಿದರು.ಆರ್ ಆರ್ ನಗರ ಕ್ಷೇತ್ರದ ವಿವಿಧ ಕಡೆಗಳಲ್ಲಿ ಇಂದು ರೋಡ್ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚಿಸಿದ ಸಿದ್ದರಾಮಯ್ಯ ಅವರು, ಈ ಕ್ಷೇತ್ರಕ್ಕೆ ಕ್ರಿ’ಮಿನಲ್ ಹಿನ್ನೆಲೆಯುಳ್ಳವರು ಶಾಸಕರಾಗಬೇಕೋ ಅಥವಾ ಶುದ್ಧ ಹಸ್ತದ ಸುಸಂಸ್ಕೃತ ಹೆಣ್ಣು ಮಗಳು ಇಲ್ಲಿಂದ ವಿಧಾನಸಭೆಗೆ ಹೋಗಬೇಕೋ ಎಂಬುದನ್ನು ಮತದಾರರೇ ನಿರ್ಧರಿಸಬೇಕು ಎಂದರು.
ಮುಂದುವರೆದು ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಮುನಿರತ್ನ, ಎಂಟಿಬಿ ನಾಗರಾಜ್, ಬೈರತಿ ಬಸವರಾಜು ಹಾಗೂ ಎಸ್.ಟಿ. ಸೋಮಶೇಖರ್ ಅವರು ದಿನ ಬೆಳಗಾದರೆ ಮನೆಗೆ ಬರುತ್ತಿದ್ದರು. ಬೆಳಗ್ಗೆ ಏಳುವಾಗ ಸಂಜೆ ಮಲಗುವ ಮುನ್ನ ಇವರ ಮುಖ ನೋಡಬೇಕಿತ್ತು. ಈ ಎಲ್ಲರೂ ಯಾರಿಗೂ ಹೇಳದೇ 25-30 ಕೋಟಿ ಪಡೆದುಕೊಂಡು ಬಿಜೆಪಿಗೆ ಹೋದರು. ಕೊನೆಗೆ ಅಪವಾದವನ್ನು ನಾನು ಹೊತ್ತುಕೊಳ್ಳಬೇಕಾಯಿತು. ಇವರಿಂದಾಗಿ ನನಗೆ ಕೆಟ್ಟ ಹೆಸರು ಬಂತು. ಮುನಿರತ್ನ ಅವರಿಗೆ ಕಾಂಗ್ರೆಸ್ ಪಕ್ಷ ಎರಡು ಬಾರಿ ಟಿಕೆಟ್ ನೀಡಿ ಶಾಸಕರನ್ನಾಗಿ ಮಾಡಿತು. ಅವರು ಈ ರೀತಿ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆ ಎಂದು ಮೊದಲೇ ಗೊತ್ತಿದ್ದರೆ ಟಿಕೆಟ್ ನೀಡುತ್ತಿರಲಿಲ್ಲ. ಕ್ರಿ’ಮಿನಲ್ ಚಟುವಟಿಕೆಗಳಿಗೆ ಮುನಿರತ್ನ ಹೆಸರುವಾಸಿ ಎಂದು ಹೇಳುತ್ತಾರೆ. ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರ ಶಾಂತಿಯುತವಾಗಿರಬೇಕು ಎಂದಾದರೆ ಕುಸುಮಾ ಅವರಿಗೆ ಮತದಾರರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕ್ಷೇತ್ರಕ್ಕೆ ಎರಡು ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ಮಂಜೂರಾಗಿದೆ. ಅನುದಾನ ಪಡೆದುಕೊಳ್ಳಲು ಮುನಿರತ್ನ, ಬೈರತಿ ಬಸವರಾಜು ಹಾಗೂ ಸೋಮಶೇಖರ್ ಅವರ ನಡುವೆ ಭಾರಿ ಪೈಪೋಟಿ ನಡೆಯುತ್ತಿತ್ತು. ಕ್ಷೇತ್ರದಲ್ಲಿ ಇಂದು ಏನಾದರೂ ಅಭಿವೃದ್ಧಿ ನಡೆದಿದ್ದರೆ ಅದು ನಮ್ಮ ಸರ್ಕಾರ ನೀಡಿದ ಅನುದಾನದಿಂದ. ನಾನೇನೂ ನನ್ನ ಮನೆಯಿಂದ ಹಣ ತಂದು ಕೊಟ್ಟಿರಲಿಲ್ಲ. ಈ ಕುರಿತು ನಾನು ಜೆಡಿಎಸ್ ಮತ್ತು ಬಿಜೆಪಿ ಜೊತೆಗೆ ಚರ್ಚೆಗೂ ಸಿದ್ಧ ಎಂದು ಸವಾಲು ಹಾಕಿದರು.
ಅನ್ನಭಾಗ್ಯ, ಕ್ಷೀರಭಾಗತ್ಯ, ಇಂದಿರಾ ಕ್ಯಾಂಟೀನ್ ನಂತಹ ಯೋಜನೆಗಳನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಈವತ್ತು ಬಡವರು ಎರಡು ಹೊತ್ತು ನೆಮ್ಮದಿಯಾಗಿ ಊಟ ಮಾಡುತ್ತಿದ್ದರೆ ಅನ್ನಭಾಗ್ಯ ಯೋಜನೆಯೇ ಕಾರಣ. ಇದಕ್ಕೆ ನಿಮ್ಮ ಎದುರಿಗೆ ಇರುವ ನ್ಯಾಯಬೆಲೆ ಅಂಗಡಿಯ ಮುಂದೆ ತೂಗು ಹಾಕಿರುವ ಫಲಕವೇ (ಅನ್ನಭಾಗ್ಯ) ಸಾಕ್ಷಿ ಎಂದು ಸಿದ್ದರಾಮಯ್ಯ ಅವರು ಹೇಳಿದರು.
“ಯಡಿಯೂರಪ್ಪ ಅವ್ರ ಅಪ್ಪನ ಮನೆಯಿಂದ ಹಣ ತಂದು ಕೊಟ್ಟಿದ್ರೇ..?”
ಅನ್ನಭಾಗ್ಯ ಯೋಜನೆಯಲ್ಲಿ ಏಳು ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಇದೀಗ ಯಡಿಯೂರಪ್ಪ ಅವರು ಅದನ್ನು ಐದು ಕೆಜಿಗೆ ಇಳಿಸಿದ್ದಾರೆ. ಅವರೇನು ಅವರ ಅಪ್ಪನ ಮನೆಯಿಂದ ಹಣ ತಂದು ಕೊಡುತ್ತಿದ್ದರೇ. ನಾನೂ ನಮ್ಮ ಅಪ್ಪನ ಮನೆಯಿಂದ ಯೋಜನೆಗೆ ಹಣ ಕೊಟ್ಟಿರಲಿಲ್ಲ. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಹತ್ತು ಕೆಜಿ ಅಕ್ಕಿ ನೀಡುತ್ತೇವೆ ಎಂದರು.
ಮುನಿರತ್ನ ಅವರು ವ್ಯಾಪಾರ ಕುದುರಿಸಿಕೊಂಡು ಬಿಜೆಪಿಗೆ ಹೋದವರು. ಒಬ್ಬೊಬ್ಬರಿಗೆ 25 ಕೋಟಿ ಕೊಟ್ಟು ಬಿಜೆಪಿಯವರು ನಮ್ಮ ಶಾಸಕರನ್ನು ಖರೀದಿ ಮಾಡಿದರು. ಇಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ. ಆ ಪಕ್ಷದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಆರ್.ಆರ್ ನಗರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಹಣಾಹಣಿ ನಡೆಯುತ್ತಿದೆ. ಕುಸುಮಾ ವಿದ್ಯಾವಂತೆ.. ಜೀವನದಲ್ಲಿ ನೊಂದಿದ್ದಾಳೆ. ಈ ಬಾರಿ ಕುಸುಮಾ ಅಂತ ಆರ್.ಆರ್ ನಗರದ ಜನ ಮತ ಹಾಕಿ ಎಂದು ಮನವಿ ಮಾಡಿದರು.
ಕೊರೊನಾದಿಂದ ರಾಜ್ಯದ ಜನತೆ ಸಂಕಷ್ಟ ಅನುಭವಿಸಿದರು. ಆದರೆ, ಬಿಜೆಪಿಗೆ ಕೊರೊನಾ ಹಬ್ಬವಾಗಿ ಪರಿಣಮಿಸಿತು. ಹೀಗಾಗಿಯೇ ವೈದ್ಯ ಉಪಕರಣಗಳ ಖರೀದಿ ಹೆಸರಲ್ಲಿ ಹಣ ಲೂಟಿ ಮಾಡಿದರು. ಯಡಿಯೂರಪ್ಪ ಅವರು ಚೆಕ್ ಮೂಲಕ ಲಂಚ ಪಡದರೆ ಅವರ ಮೊಮ್ಮಗ ಶಶಿಧರ ಮರಡಿ ಆರ್ಟಿಜಿಎಸ್ ಮೂಲಕ ತೆಗೆದುಕೊಳ್ಳುತ್ತಾರೆ. ಲಂಚ ತೆಗೆದುಕೊಳ್ಳುವ ವಿಚಾರದಲ್ಲಿ ಬಿಜೆಪಿಯವರು ಈಗ ಅಪ್ಗ್ರೇಡ್ ಆಗಿದ್ದಾರೆ ಎಂದು ಟೀಕಿಸಿದರು.
“ಕೊರೊನಾ ಸೋಂಕಿತರ ಸಾವಿಗೆ ಕೇಂದ್ರ, ರಾಜ್ಯ ಸರ್ಕಾರವೇ ಹೊಣೆ”
ಕೊರೊನಾದಿಂದ ಸೋಕಿನಿಂದ ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಅದಕ್ಕೆ ಯಾರು ಹೊಣೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಸಿಪಿಐಎಂ ಮುಖಂಡ ಮಾರುತಿ ಮಾನ್ಪಡೆ ಅವರ ಸಾವಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂಬ ಕೇಂದ್ರ ಸಚಿವ ಸದಾನಂದಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸದಾನಂದಗೌಡರ ಹೇಳಿಕೆ ಬಾಲಿಶ. ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು. ಇದರಿಂದಾಗಿಯೇ ರೈತರು ಬೀದಿಗೆ ಇಳಿಯುವಂತಾಯಿತು. ಹೀಗಾಗಿ ಮಾನ್ಪಡೆಯವರ ಸಾವಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದರು